ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ತಿಳಿಸುವುದೇನೆಂದರೆ: ಸಹಾಬಿಗಳು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯಲ್ಲಿ ಕುಳಿತಿರುವಾಗ, ಒಂಟೆಯಲ್ಲಿ ಸವಾರಿ ಮಾಡುತ್ತಾ ಒಬ್ಬ ವ್ಯಕ್ತಿ ಅಲ್ಲಿಗೆ ಬಂದರು. ನಂತರ ಅವರು ಒಂಟೆಯನ್ನು ಮಸೀದಿಯೊಳಗೆ ಮಂಡಿಯೂರಿಸಿ ಕಟ್ಟಿ ಹಾಕಿದರು. ನಂತರ ಅವರೊಡನೆ, "ನಿಮ್ಮಲ್ಲಿ ಮುಹಮ್ಮದ್ ಯಾರು?" ಎಂದು ಕೇಳಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಗಡಿಗರ ನಡುವೆ ಒರಗಿ ಕುಳಿತಿದ್ದರು. ಸಹಾಬಿಗಳು ಉತ್ತರಿಸಿದರು: "ಒರಗಿ ಕುಳಿತಿರುವ ಈ ಬೆಳ್ಳಗಿನ ವ್ಯಕ್ತಿ." ಆಗ ಆ ವ್ಯಕ್ತಿ, "ಓ ಅಬ್ದುಲ್ ಮುತ್ತಲಿಬರ ಮಗನೇ!" ಎಂದು ಕರೆದರು. ಆಗ ಪ್ರವಾದಿಯವರು, "ನನಗೆ ನಿನ್ನ ಮಾತು ಕೇಳುತ್ತಿದೆ. ನಿನಗೇನು ಬೇಕು ಕೇಳು ಉತ್ತರಿಸುತ್ತೇನೆ" ಎಂದರು. ಆಗ ಆ ವ್ಯಕ್ತಿ ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಾನು ತಮ್ಮಲ್ಲಿ ಕೆಲವು ಕಠಿಣ ಪ್ರಶ್ನೆಗಳನ್ನು ಕೇಳುತ್ತೇನೆ. ತಾವು ನನ್ನ ಮೇಲೆ ಕೋಪ ಮಾಡಿಕೊಳ್ಳಬಾರದು." ಅಂದರೆ, ನನ್ನ ಮೇಲೆ ಸಿಟ್ಟು ಮಾಡಿಕೊಳ್ಳಬಾರದು. ನನ್ನ ಪ್ರಶ್ನೆ ಕೇಳಿ ಕಸಿವಿಸಿಯಾಗಬಾರದು. ಅವರು ಹೇಳಿದರು: "ನೀನು ಕೇಳಲು ಬಯಸುವುದನ್ನು ಕೇಳು." ಆ ವ್ಯಕ್ತಿ ಕೇಳಿದರು: "ತಮ್ಮ ಮತ್ತು ತಮ್ಮ ಪೂರ್ವಜರ ಪರಿಪಾಲಕನನ್ನು (ಅಲ್ಲಾಹನನ್ನು) ಮುಂದಿಟ್ಟು ಕೇಳುತ್ತೇನೆ. ತಮ್ಮನ್ನು ಜನರ ಕಡೆಗೆ ಕಳುಹಿಸಿದ್ದು ಅಲ್ಲಾಹನೋ?" ಆಗ ಪ್ರವಾದಿಯವರು ತಾನು ಹೇಳುತ್ತಿರುವುದು ಸತ್ಯವೆಂದು ಒತ್ತುಕೊಡಲು ಆಣೆ ಹಾಕುತ್ತಾ ಹೇಳಿದರು: "ಅಲ್ಲಾಹನಾಣೆ! ಹೌದು." ಆ ವ್ಯಕ್ತಿ ಹೇಳಿದರು: "ಅಲ್ಲಾಹನನ್ನು ಮುಂದಿಟ್ಟು ಕೇಳುತ್ತೇನೆ. ದಿನರಾತ್ರಿಯಲ್ಲಿ ನಾವು ಐದು ವೇಳೆಯ ನಮಾಝ್ಗಳನ್ನು, ಅಂದರೆ ಕಡ್ಡಾಯ ನಮಾಝ್ಗಳನ್ನು ನಿರ್ವಹಿಸಬೇಕೆಂದು ತಮಗೆ ಆದೇಶಿಸಿದ್ದು ಅಲ್ಲಾಹನೋ?" ಅವರು ಉತ್ತರಿಸಿದರು: "ಅಲ್ಲಾಹನಾಣೆ! ಹೌದು." ಅವರು ಕೇಳಿದರು: "ಅಲ್ಲಾಹನನ್ನು ಮುಂದಿಟ್ಟು ಕೇಳುತ್ತೇನೆ. ವರ್ಷದಲ್ಲಿ ಈ ತಿಂಗಳು, ಅಂದರೆ ರಮದಾನ್ ತಿಂಗಳು ನಾವು ಉಪವಾಸ ಆಚರಿಸಬೇಕೆಂದು ತಮಗೆ ಆದೇಶಿಸಿದ್ದು ಅಲ್ಲಾಹನೋ?" ಅವರು ಉತ್ತರಿಸಿದರು: "ಅಲ್ಲಾಹನಾಣೆ! ಹೌದು." ಅವರು ಕೇಳಿದರು: "ಅಲ್ಲಾಹನನ್ನು ಮುಂದಿಟ್ಟು ಕೇಳುತ್ತೇನೆ. ನಮ್ಮಲ್ಲಿನ ಶ್ರೀಮಂತರಿಂದ ಈ ದಾನವನ್ನು, ಅಂದರೆ ಝಕಾತನ್ನು ಪಡೆದು ನಮ್ಮಲ್ಲಿರುವ ಬಡವರಿಗೆ ಹಂಚಬೇಕೆಂದು ತಮಗೆ ಆದೇಶಿಸಿದ್ದು ಅಲ್ಲಾಹನೋ?" ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಅಲ್ಲಾಹನಾಣೆ! ಹೌದು." ಆಗ ಅವರು ಇಸ್ಲಾಂ ಸ್ವೀಕರಿಸಿದರು ಮತ್ತು ತನ್ನ ಗೋತ್ರವನ್ನು ಇಸ್ಲಾಂ ಧರ್ಮಕ್ಕೆ ಆಮಂತ್ರಿಸುತ್ತೇನೆಂದು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸಿದರು. ನಂತರ ತನ್ನನ್ನು ಪರಿಚಯಿಸುತ್ತಾ ತಾನು ಬನೂ ಸಅದ್ ಗೋತ್ರಕ್ಕೆ ಸೇರಿದ ದಿಮಾಮ್ ಬಿನ್ ಸಅಲಬ ಎಂದು ಹೇಳಿದರು.